Gruhalakshmi : ಗೃಹಲಕ್ಷ್ಮೀ ನೋಂದಣಿಗಾಗಿ ಇನ್ನು ಮುಂದೆ ಮೆಸೇಜ್‌ಗಾಗಿ ಕಾಯಬೇಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಗೃಹಲಕ್ಷ್ಮೀ ನೋಂದಣಿಗಾಗಿ ಇನ್ನು ಮುಂದೆ ಮೆಸೇಜ್‌ಗಾಗಿ ಕಾಯಬೇಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌
*********************************
ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ ನೋಂದಣಿ ಪ್ರಕ್ರಿಯೆ ಮತ್ತಷ್ಟುಸರಳಗೊಂಡಿದ್ದು, ಅರ್ಹ ಫಲಾನುಭವಿಗಳು ನೇರವಾಗಿ ನೋಂದಣಿ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಪಷ್ಟಪಡಿಸಿದರು.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಅರ್ಹ ಮಹಿಳೆಯರಿಗೆ ಮಾಸಿಕ 2 ಸಾವಿರ ರು. ನೀಡುವ ಗೃಹಲಕ್ಷ್ಮೀ ಯೋಜನೆಯ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ಇದಕ್ಕೂ ಮೊದಲು ಅರ್ಹ ಫಲಾನುಭವಿಗಳ ಮೊಬೈಲ್‌ ಸಂಖ್ಯೆಗೆ ಮೆಸೇಜ್‌ ಬಂದು ಅದರಲ್ಲಿನ ದಿನಾಂಕದಂದು ನೋಂದಣಿ ಕೇಂದ್ರಗಳಿಗೆ ತೆರಳಬೇಕಿತ್ತು. ಆದರೆ ಈಗ ಎಸ್‌ಎಂಎಸ್‌ಗೆ ಕಾಯಬೇಕಿಲ್ಲ ಎಂದರು.

ಹತ್ತಿರದ ನೋಂದಣಿ ಕೇಂದ್ರಗಳಿಗೆ ದಾಖಲೆಗಳೊಂದಿಗೆ ತೆರಳಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ವಿವರಿಸಿ, ಬುಧವಾರ 5,28,051 ಮಹಿಳೆಯರು ನೋಂದಣಿ ಮಾಡಿಸಿದ್ದು, ಒಟ್ಟಾರೆ ಇದುವರೆಗೂ 55,89,865 ಮಹಿಳೆಯರು ಅರ್ಜಿ ಸಲ್ಲಿಸಿದಂತಾಗಿದೆ. ಯೋಜನೆಯಡಿ ನೋಂದಣಿ ಮಾಡಲು ಯಾರಾದರೂ ಹಣ ಪಡೆದರೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು ಎಂದು ಹೇಳಿದರು.

ಸೇವಾ ಕೇಂದ್ರಗಳಲ್ಲಿ ಅಸಡ್ಡೆ ತೋರಿದರೆ ಅಂತಹವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿ, ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್‌ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿರುವ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಾನೂನಿನಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಕಾನೂನಿನಡಿ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ನನಗೆ ಲಭಿಸಿದ ಮಾಹಿತಿ ಪ್ರಕಾರ ಯಾವುದೇ ವಿಡಿಯೋ ವೈರಲ್‌ ಆಗಿಲ್ಲ ಎಂದು ತಿಳಿಸಿದರು.

ಉಡುಪಿ ಜಿಲ್ಲೆಯಾದ್ಯಂತ ಮಳೆ ಆರ್ಭಟದಿಂದ ಇದುವರೆಗೂ 9 ಮಂದಿ ಮೃತಪಟ್ಟಿದ್ದು, ಸುಮಾರು 28 ಕೋಟಿ ರು. ಮೌಲ್ಯದ ಆಸ್ತಿಗೆ ನಷ್ಟಉಂಟಾಗಿದೆ ಎಂದು ಮಾಹಿತಿ ನೀಡಿದರು.

Post a Comment

0 Comments