ಈ ಕುರಿತು ಅಮಿತ್ ಶಾ ಮಾತನಾಡಿ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಶೇ 60 ಮತದೊಂದಿಗೆ 28ಕ್ಕೆ 28 ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಗೆಲ್ಲಿಸು ನಿಟ್ಟಿನಲ್ಲಿ ಟಾಸ್ಕ್ ನೀಡಿದ್ದಾರೆ. ನರೇಂದ್ರ ಮೋದಿಯವರ ಸಂದೇಶ, ಅವರ ಕೆಲಸ, ಕಾಂಗ್ರೆಸ್ಸಿನ ಅಭಿವೃದ್ಧಿಶೂನ್ಯತೆ- ಭ್ರಷ್ಟಾಚಾರ ಕುರಿತು ಮನೆಮನೆಗೆ ಮಾಹಿತಿ ತಲುಪಿಸಿ. ಈ ಮೂಲಕ 28ಕ್ಕೆ 28 ಕ್ಷೇತ್ರಗಳಲ್ಲೂ ಎನ್ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಹೇಳಿದರು
ರಾಜ್ಯದ ಅಭಿವೃದ್ಧಿ ಕಡೆ ಕಾಂಗ್ರೆಸ್ ಗಮನ ಕೊಡುತ್ತಿಲ್ಲ. ಕುರ್ಚಿ ಉಳಿಸಿಕೊಳ್ಳಲು ಸಿಎಂ ಪ್ರಯತ್ನ ನಡೆದರೆ, ಕುರ್ಚಿ ಕಸಿದುಕೊಳ್ಳಲು ಇತರರು ಪ್ರಯತ್ನ ಮಾಡುತ್ತಿದ್ದಾರೆ. ಯುಪಿಎ 10 ವರ್ಷಗಳಲ್ಲಿ ಕರ್ನಾಟಕಕ್ಕೆ 1,42,000 ಕೋಟಿ ಕೊಟ್ಟರೆ, ನಾವು 10 ವರ್ಷಗಳಲ್ಲಿ 4,91,000 ಕೋಟಿ ಕೊಟ್ಟಿದ್ದೇವೆ ಎಂದು ತಿಳಿಸಿದರು.
2014ರಲ್ಲಿ ಬಿಜೆಪಿಗೆ 43 ಶೇ ಮತದೊಂದಿಗೆ 17 ಕ್ಷೇತ್ರ, 2019ರಲ್ಲಿ 51 ಶೇ ಮತದೊಂದಿಗೆ 25 ಕ್ಷೇತ್ರದಲ್ಲಿ ಗೆಲ್ಲಿಸಿದ್ದೀರಿ. ಒಂದೆಡೆ ಪ್ರಧಾನಮಂತ್ರಿ ಮೋದಿ ಅವರು ಇದ್ದಾರೆ. ಮುಖ್ಯಮಂತ್ರಿ ಆಗಿದ್ದಾಗ ಮತ್ತು ಪ್ರಧಾನಮಂತ್ರಿ ಆಗಿರುವಾಗ ಅವರ ಮೇಲೆ ಭ್ರಷ್ಟಾಚಾರದ ಆರೋಪವೇ ಇರಲಿಲ್ಲ. ಇನ್ನೊಂದೆಡೆ 12 ಲಕ್ಷ ಕೋಟಿಯ ಭ್ರಷ್ಟಚಾರದ ಕೂಟ ಇಂಡಿ ಇದೆ. ಕರ್ನಾಟಕದ ಜನರು ಭ್ರಷ್ಟಾಚಾರಿಗಳನ್ನು ಇಷ್ಟಪಡುವುದಿಲ್ಲ. ಕಾಮನ್ವೆಲ್ತ್, 2 ಜಿ, ಸೇಬು ಮಾರಾಟದ ಹಗರಣ, ಮಂತ್ರಿ ನಿವಾಸ ಹಗರಣ, ಜಮ್ಮು- ಕಾಶ್ಮೀರ ಹಗರಣ, ಆಗಸ್ತ ಹೆಲಿಕಾಪ್ಟರ್ ಹಗರಣ ಸೇರಿ 12 ಲಕ್ಷ ಕೋಟಿಯ ಹಗರಣ ಮಾಡಿದವರು ಇಂಡಿ ಕೂಟದಲ್ಲಿದ್ದಾರೆ. ಮೋದಿಯವರು ಒಂದು ಪೈಸೆಯ ಭ್ರಷ್ಟಾಚಾರ ಮಾಡಿಲ್ಲ ಎಂದು ಹೇಳಿದರು.
ಮೋದಿಯವರೊಂದಿಗೆ ನಾನು 4 ದಶಕದಿಂದ ಕೆಲಸ ಮಾಡುತ್ತಿದ್ದೇನೆ. ಮೋದಿಯವರು 2 ದಶಕಕ್ಕೂ ಹೆಚ್ಚು ಕಾಲ ಮುಖ್ಯಮಂತ್ರಿ- ಪ್ರಧಾನಿಯಾಗಿ ಕೆಲಸ ಮಾಡಿದ್ದು, ಒಂದು ದಿನವೂ ರಜೆ ಪಡೆದಿಲ್ಲ. ರಾಹುಲ್ ಬಾಬಾ ಅವರು ಬೇಸಿಗೆ ಬಂದೊಡನೆ ವಿದೇಶಕ್ಕೆ ತೆರಳುತ್ತಾರೆ ಎಂದು ಟೀಕಿಸಿದರು.
ಬಡವರು, ವಂಚಿತರು, ಮಹಿಳೆಯರು, ಯುವಜನರಿಗಾಗಿ ವಿವಿಧ ಜನಪರ ಯೋಜನೆಗಳನ್ನು ಮೋದಿಜೀ ಜಾರಿಗೊಳಿಸಿದ್ದಾರೆ. 12 ಕೋಟಿ ಶೌಚಾಲಯ ನಿರ್ಮಿಸಿಕೊಟ್ಟಿದ್ದಾರೆ. 4 ಕೋಟಿ ಮನೆಗಳನ್ನು ನಿರ್ಮಿಸಿಕೊಟ್ಟಿದ್ದಾರೆ. 10 ಕೋಟಿ ಗ್ಯಾಸ್ ಸಿಲಿಂಡರ್ ಸಂಪರ್ಕ ಕೊಟ್ಟಿದ್ದಾರೆ. 5 ಲಕ್ಷದ ಆರೋಗ್ಯ ವಿಮೆ ಕಲ್ಪಿಸಿಕೊಟ್ಟಿದ್ದಾರೆ. ಹಲವು ದಶಕಗಳ ನಮ್ಮ ಆಶ್ವಾಸನೆಗಳನ್ನು ಈಡೇರಿಸಿದ್ದೇವೆ. 370ನೇ ವಿಧಿ ರದ್ದು ಮಾಡಿದ್ದೇವೆ.
500 ವರ್ಷಗಳಿಂದ ಟೆಂಟ್ನಲ್ಲಿದ್ದ ರಾಮಲಲಾನಿಗೆ ಭವ್ಯ ರಾಮಮಂದಿರ ನಿರ್ಮಿಸಿದ್ದೇವೆ. ಕಾಂಗ್ರೆಸ್ ಈ ವಿಚಾರದಲ್ಲಿ ನಿರಂತರ ವಿಳಂಬ ಮಾಡಿತ್ತು. ತುಷ್ಟೀಕರಣ- ಮತಬ್ಯಾಂಕಿನ ಕಾರಣಕ್ಕಾಗಿ ರಾಮಮಂದಿರದ ಉದ್ಘಾಟನೆಗೆ ಕೂಡ ಕಾಂಗ್ರೆಸ್ ಮುಖಂಡರು ಹಾಜರಾಗಿಲ್ಲ ಎಂದು ಆಕ್ಷೇಪಿಸಿದರು. ಶರಣಾರ್ಥಿಗಳಾಗಿ ಪಾಕಿಸ್ತಾನ ಮತ್ತಿತರ ದೇಶಗಳಿಂದ ಬಂದ ಹಿಂದೂ, ಸಿಕ್ಖ, ಕ್ರಿಶ್ಚಿಯನ್ ಮತ್ತಿತರರಿಗೆ ಇಲ್ಲಿನ ಪೌರತ್ವ ಕೊಡಲಾಗಿದೆ ಎಂದು ತಿಳಿಸಿದರು.
ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಾವು ಚುನಾವಣಾ ಕಣದಲ್ಲಿದ್ದೇವೆ. ಕುಟುಂಬವಾದ, ಭ್ರಷ್ಟಾಚಾರದ ಇಂಡಿ ಒಕ್ಕೂಟ ಇನ್ನೊಂದೆಡೆ ಕಣದಲ್ಲಿದೆ. ಪ್ರವಾಸಕ್ಕೆ ಹೋದಾಗ ಎಲ್ಲ ರಾಜ್ಯಗಳಲ್ಲೂ ಮೋದಿ, ಮೋದಿ ಘೋಷಣೆ ಕೇಳುತ್ತಿದೆ ಎಂದು ತಿಳಿಸಿದರು.
ಪಾಕಿಸ್ತಾನದಲ್ಲಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, ಹೊಸ ಸಂಸತ್ ಭವನ, ಕ್ರಿಮಿನಲ್ ಕಾನೂನು ಬದಲಾವಣೆ, 5ನೇ ಆರ್ಥಿಕ ಶಕ್ತಿಯಾಗಿ ದೇಶವನ್ನು ಕೊಂಡೊಯ್ದ ಕುರಿತು ವಿವರ ನೀಡಿದರು. ಮೂಲಸೌಕರ್ಯಕ್ಕೆ ಆದ್ಯತೆ ಕೊಟ್ಟ ಕುರಿತು ವಿವರಿಸಿದರು. ಪ್ರಜಾಪ್ರಭುತ್ವಕ್ಕೆ ಏನೂ ಆಗಿಲ್ಲ. ಭ್ರಷ್ಟಾಚಾರಿಗಳನ್ನು ಬಚಾವ್ ಮಾಡಲು ಇಂಡಿ ಒಕ್ಕೂಟ ಮಾಡಿದ್ದಾರೆ. ಭ್ರಷ್ಟಾಚಾರಿಗಳನ್ನು ಜೈಲಿಗೆ ಕಳುಹಿಸಿದ್ದೇವೆ; ಮುಂದೆಯೂ ಕಳುಹಿಸಲಿದ್ದೇವೆ ಎಂದು ತಿಳಿಸಿದರು.
0 Comments